ಕಲಬುರಗಿ: ಎಸ್.ಎಸ್.ಎಲ್.ಸಿ.-2 ಪರೀಕ್ಷೆಯು ಇದೇ ಮೇ 26 ರಿಂದ ಜೂನ್ 2ರ ವರೆಗೆ ಜಿಲ್ಲೆಯಾದ್ಯಂತ 73 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಪರೀಕ್ಷೆ ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚನೆ ನೀಡಿದರು.
ಶುಕ್ರವಾರ ಪರೀಕ್ಷೆ ಸಂಬಂಧ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಪರೀಕ್ಷೆ-2 ಕ್ಕೆ ಜಿಲ್ಲೆಯಿಂದ ಒಟ್ಟು 26,752 ವಿದ್ಯಾರ್ಥಿಗಳು ನೋಂದಣಿಯಾಗಿರುತ್ತಾರೆ.
60 ಸಾಮಾನ್ಯ, 9 ಸೂಕ್ಷ್ಮ ಹಾಗೂ 4 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಅದರಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ 73 ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳು ಇರುವುದನ್ನು ಕೇಂದ್ರದ ಮುಖ್ಯಸ್ಥರು ಪರೀಕ್ಷಾ ಮುನ್ನವೇ ಖಾತ್ರಿಪಡಿಸಿಕೊಳ್ಳಬೇಕು. ಇತ್ತೀಚೆಗೆ ದಿನಂಪ್ರತಿ ಮಳೆ ಬರುತ್ತಿರುವುದರಿಂದ ಈ ಬಗ್ಗೆಯೂ ಮುನ್ನಚ್ಚರಿಕೆ ಕ್ರಮ ವಹಿಸಬೇಕು. ಪೊಲೀಸ್ ಇಲಾಖೆಯಿಂದ ಪ್ರಿಸ್ಕಿಂಗ್ ಮಾಡಲು ಪೊಲೀಸರನ್ನು ನಿಯೋಜಿಸಬೇಕು ಎಂದು ಸಭೆಯಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ನಕಲು ತಡೆಯುವ ನಿಟ್ಟಿನಲ್ಲಿ ಪ್ರತಿ ಕೇಂದ್ರಕ್ಕೆ ಸ್ಥಳೀಯ ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ. ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲಾ ಪಂಚಾಯತ್ ಸಿ.ಇ.ಓ ನೇತೃತ್ವದಲ್ಲಿ 14 ವೆಬ್ ಕಾಸ್ಟಿಂಗ್ ತಂಡ ನಿಗಾ ಇಡಲಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ರವಾನಿಸಲು ತಾಲೂಕಿನ ತಹಶೀಲ್ದಾರ, ಖಜಾನೆ ಅಧಿಕಾರಿ, ಬಿ.ಇ.ಓ ಒಳಗೊಂಡ ತ್ರಿಸದಸ್ಯ ಸಮಿತಿ ರಚಿಸಲಾಗಿದೆ. 31-ಜನ ಅಧಿಕಾರಿಗಳನ್ನು ಮಾರ್ಗಧಿಕಾರಿಗಳಾಗಿ ನೇಮಕ ಮಾಡಲಾಗಿದೆ ಎಂದು ಎ.ಡಿ.ಸಿ. ರಾಯಪ್ಪ ಹುಣಸಗಿ ತಿಳಿಸಿದರು.
ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಅವರು ಎಸ್.ಎಸ್.ಎಲ್.ಸಿ. ಪರೀಕ್ಷೆ-2 ಸಭೆಗೆ ತೆಗೆದುಕೊಂಡ ಸಿದ್ಧತೆ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಎ.ಸಿ.ಪಿ. ಪ್ರವೀಣ ನಾಯ್ಕ್, ಡಿ.ಎಚ್.ಓ. ಡಾ.ಶರಣಬಸಪ್ಪ ಕ್ಯಾತನಾಳ ಸೇರಿದಂತೆ ಪರೀಕ್ಷಾ ಕೇಮದ್ರದ ಮುಖ್ಯಸ್ಥರು, ಶಾಲಾ ಶಿಕ್ಷಣ ಇಲಾಖೆಯ ಇತರೆ ಅಧಿಕಾರಿಗಳಿದ್ದರು.