ಕಲಬುರಗಿ: ಚಿತ್ತಾಪುರದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಪ್ರವಾಸಿ ಮಂದಿರದಲ್ಲಿ 5 ಗಂಟೆಗಳ ಕಾಲ ದಿಗ್ಬಂಧನಕ್ಕೆ ಕಾರಣಕರ್ತರಾದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ವಿಧಾನ ಪರಿಷತ್ ನ ಬಿಜೆಪಿಯ ಮುಖ್ಯ ಸಚೇತಕ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದ್ದರೆ, ಛಲವಾದಿ ನಾರಾಯಣಸ್ವಾಮಿ ಅವರಿಗೆ ಅಪಮಾನ ಮಾಡುವುದಲ್ಲದೆ, ಕಲಬುರಗಿ ಜಿಲ್ಲೆಯ ಗೂಂಡಾ ರಾಜ್ಯವನ್ನಾಗಿ ಮಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು, ದಿಗ್ಬಂಧನಕ್ಕೆ ಕಾರಣಕರ್ತ ಪೊಲೀಸ್ ಅಧಿಕಾರಿಗಳಾದ ಮಹೇಶ್ ಮೇಘನ್ನನವರ್, ಶಂಕರಗೌಡ ಪಾಟೀಲ್, ಚಂದ್ರಶೇಖರ್ ತಿಗಡಿ ಸೇರಿದಂತೆ ಇತರ ಅಧಿಕಾರಿಗಳನ್ನು ವಜಾ ಮಾಡಬೇಕು ಹಾಗೂ ನಮ್ಮ ಕಾರ್ಯಕರ್ತರ ಮೇಲೆ ಹಾಕಿರುವ ಕೇಸ್ ಗಳನ್ನು ವಾಪಸ್ ಪಡೆಯುವುದು ಸೇರಿದಂತೆ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಪ್ರಮುಖ ಬೇಡಿಕೆಗಳನ್ನು ಈಡೇರಿಸುವವರೆಗೂ ನಾಳೆ (ಮೇ.24ರಂದು)ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯಲಿರುವ ಧರಣಿ ಸತ್ಯಾಗ್ರಹವನ್ನು ಕೈ ಬಿಡುವುದಿಲ್ಲ ಎಂದು ವಾಗ್ದಾನ ಮಾಡಿದ್ದಾರೆ.
ಈಗಾಗಲೇ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಮಾನ್ಯ ರಾಜ್ಯಪಾಲ, ಡಿಐಜಿ ಸೇರಿದಂತೆ ಹಲವರಿಗೆ ಮನವಿ ಪತ್ರ ಬರೆದು ಒತ್ತಡ ಹೇರಿದ್ದೇವೆ ಎಂದರು.
ನಾಳೆ(ಶನಿವಾರ) ನಡೆಯಲಿರುವ ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಗೋವಿಂದ್ ಕಾರಜೋಳ, ಸಿ.ಟಿ ರವಿ ಸೇರಿದಂತೆ ಹಲವು ನಾಯಕರುಗಳು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಶಾಸಕ ಬಸವರಾಜ ಮತ್ತಿಮಡು, ಅವಿನಾಶ್ ಜಾಧವ್, ಶಶೀಲ್ ನಮೋಶಿ, ಚಂದು ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್, ಸುಭಾಷ್ ಗುತ್ತೇದಾರ್, ಅಮರನಾಥ್ ಪಾಟೀಲ್, ಶಿವರಾಜ್ ರದ್ದೇವಾಡಗಿ, ನಿತಿನ್ ಗುತ್ತೇದಾರ್ ಸೇರಿದಂತೆ ಮತ್ತಿತರರು ಇದ್ದರು.