ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪತಿಯೊಬ್ಬನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ಆದೇಶ ಪ್ರಕಟಿಸಿದೆ.
ಜೇವರ್ಗಿ ತಾಲ್ಲೂಕಿನ ಕುರನಳ್ಳಿ ಗ್ರಾಮದ ಮಹಾಂತಪ್ಪ ನಿಂಗಪ್ಪ ದೊಡ್ಡಮನಿ ಎಂಬಾತನೆ ಈ ಶಿಕ್ಷೆಗೆ ಒಳಗಾದ ಅಪರಾಧಿ.
ಅದೇ ಗ್ರಾಮ ಕುರನಳ್ಳಿಯ ಮಲ್ಕಪ್ಪ ಕಟ್ಟಿಮನಿ ಎಂಬುವವರ ಮಗಳು ಸಂಗೀತಾ ಎಂಬುವವರನ್ನು 10 ವರ್ಷಗಳ ಹಿಂದೆ ಮಹಾಂತಪ್ಪ ದೊಡ್ಡಮನಿ ವಿವಾಹವಾಗಿದ್ದ. ಈತ ನಿತ್ಯವೂ ಮದ್ಯ ಸೇವನೆ ಮಾಡುತ್ತಿದ್ದು, 2023ರ ಡಿಸೆಂಬರ್ 26ರಂದು ಸಂಜೆ ಪತ್ನಿ ಸಂಗೀತಾಗೆ ಕುಡಿಯಲು ದುಡ್ಡು ಕೊಡು ಎಂದು ಪೀಡಿಸಿದ್ದ. ಆ ಸಂದರ್ಭದಲ್ಲಿ ದುಡ್ಡು ಕೊಡಲು ನಿರಾಕರಿಸಿದ್ದ ಪತ್ನಿ ಸಂಗೀತಾಳನ್ನು ಕೊಡಲಿಯಿಂದ ತಲೆಯ ಹಿಂಭಾಗಕ್ಕೆ ಹೊಡೆದಿದ್ದಾನೆ. ತೀವ್ರ ಗಾಯಗೊಂಡಿದ್ದ ಸಂಗೀತಾ ಮೃತಪಟ್ಟಿದ್ದಾರೆ. ಜಗಳ ಬಿಡಿಸಲು ಬಂದ ಮಗನಿಗೂ ಮಹಾಂತಪ್ಪ ಹೊಡೆದಿದ್ದ ಎನ್ನಲಾಗಿದೆ. ಈ ದಂಪತಿಗಳಿಗೆ ಇಬ್ಬರು ಮಕ್ಕಳು ಇದ್ದಾರೆ.
ಈ ಕುರಿತಾಗಿ ಜೇವರ್ಗಿ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖಾಧಿಕಾರಿಗಳಾದ ಪಿಎಸ್ಐ ಜ್ಯೋತಿ ಹಾಗೂ ಸಿಪಿಐ ರಾಜೇಸಾಬ್ ನದಾಫ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ಕುರಿತಾಗಿ ವಾದ-ಪ್ರತಿವಾದ ಆಲಿಸಿದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಹ್ಮದ್ ಮುಝೀರ್ ಉಲ್ಲಾ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಕುರಿತಾಗಿ ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕ ಹಯ್ಯಾಳಪ್ಪ ಎನ್. ಬಳಬಟ್ಟಿ ವಾದ ಮಂಡಿಸಿದ್ದರು.