ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರೀಕರಣ ಹೆಚ್ಚಿಸುವ ಮಹತ್ವಾಕಾಂಕ್ಷೆಯೊಂದಿಗೆ ಇದೇ ಜುಲೈ 5ಕ್ಕೆ ಆಯವ್ಯಯ ಘೋಷಣೆಯ ಸಸಿ ನೆಡೆಯುವ ಅಭಿಯಾನದ “ಹಸಿರು ಪಥ” ಯೋಜನೆಗೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೂಚಿಸಿದರು.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಇದೇ ದಿನದಂದು ರಾಜ್ಯ ಮಟ್ಟದ ವನಮಹೋತ್ಸವ ಕಾರ್ಯಕ್ರಮಕ್ಕೆ ಮತ್ತು ಕಲಬುರಗಿ ನಗರದಾದ್ಯಂ ಕೆರೆ, ಉದ್ಯಾನವನ, ಪ್ರಮುಖ ವೃತ್ತ, ರಸ್ತೆ ಬದಿ ಸಸಿ ನೆಡೆಯುವ “ಹಸಿರು ಕಲಬುರಗಿ” ಅಭಿಯಾನಕ್ಕೂ ಚಾಲನೆ ನೀಡಲಾಗುತ್ತದೆ ಎಂದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಎಅಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಪ್ರದೇಶದ ಸಚಿವರು, ಶಾಸಕರುವಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಆಗಮಿಸುವುದರಿಂದ, ಎಲ್ಲಿಯೂ ಶಿಷ್ಟಾಚಾರದಲ್ಲಿ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು. ಕಾರ್ಯಕ್ರಮ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ಅದರಂತೆ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ ತಮಗೆ ನೀಡಿದ ಜವಾಬ್ದಾರಿಯಂತೆ ಕಾರ್ಯನಿರ್ವಹಿಸಬೇಕು ಎಂದರು.
ಕಲಬುರಗಿ ನಗರದ ಪಿ.ಡಿ.ಎ. ಕಾಲೇಜಿನ ಅವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಲ್ಲಿಯೆ ಬೃಹತ್ ಸಸಿ ನೆಡೆಯುವ ಅಭಿಯಾನ ಸಹ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ 6-7 ಸಾವಿರ ಜನರು ಸೇರುವ ನಿರೀಕ್ಷೆ ಇರುವುದರಿಂದ ಜನಸಂದಣಿ ನಿಯಂತ್ರಣಕ್ಕೆ ರಾಜ್ಯ ಪೊಲೀಸ್ ಇಲಾಖೆಯಿಂದ ಇತ್ತೀಚೆಗೆ ಎಸ್.ಓ.ಪಿ ಹೊರಡಿಸಿದ್ದು, ಅದರಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ, ಸ್ವಚ್ಛತೆ, ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಡಿ.ಸಿ.ಎಫ್ ಸುಮಿತ್ ಪಾಟೀಲ ಮಾತನಾಡಿ ಹಸಿರು ಪಥ ಯೋಜನೆಯಡಿ ರಾಜ್ಯದಾದ್ಯಂತ 5,000 ಕಿ.ಮೀ ರಸ್ತೆ ಬದಿ ಗಿಡ ನೆಡಲಾಗುತ್ತಿದೆ. ಇನ್ನು ಮನೆಗೊಂದು ಮರ ಯೋಜನೆಯಡಿ ಅರಣ್ಯ ಇಲಾಖೆ, ಕಲಬುರಗು ಮಹಾನಗರ ಪಾಲಿಕೆ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಸಹಭಾಗಿತ್ವದಲ್ಲಿ ಅನುಷ್ಠಾನ ಮಾಡಲಾಗುತ್ತಿರುವ “ಹಸಿರು ಕಲಬುರಗಿ”ಗಾಗಿ 37,100 ಎತ್ತರದ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸುವ ಯೋಜನೆ ಹೊಂದಲಾಗಿದೆ ಎಂದು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ಎ.ಸಿ.ಪಿ. ಪ್ರವೀಣ ನಾಯಕ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ ಸೇರಿದಂತೆ ಪೊಲೀಸ್, ಅರಣ್ಯ, ಮಹಾನಗರ ಪಾಲಿಕೆಯ ಅಧಿಕಾರಿಗಳು ಇದ್ದರು.
ಸಭೆಯ ನಂತರ ಜುಲೈ 5 ರಂದು ನಗರದಲ್ಲಿ ಅರಣ್ಯ ಇಲಾಖೆಯ ಕಾರ್ಯಕ್ರಮ ನಡೆಯುವ ಪಿ.ಡಿ.ಎ. ಕಾಲೇಜು ಹಿಂಭಾಗದ ಮೈದಾನ ಸ್ಥಳವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಅವರೊಂದಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಭೇಟಿ ನೀಡಿ ಪರಿಶೀಲಿದರು.