ಕಲಬುರಗಿ: ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಸುವುದು ಪ್ರಸ್ತುತ ದಿನಗಳಲ್ಲಿ ಅತಿ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಪ್ರಾಧ್ಯಪಕಿ ಡಾ.ಮೈತ್ರಾದೇವಿ ಹಳೆಮನಿ ಹೇಳಿದರು.
ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಚ್ ಕೆ ಇ ಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ ಸರ್ಕಾರದ ಯುವ ಜನ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ ಕಲಬುರಗಿ, ಜನಕಲ್ಯಾಣ ಎಡ್ಜುಕೇಷನ್ ಆಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಹಾಗೂ ಯುತ್ ಅಡ್ವೆಂಚರ್ ಸ್ಪೋರ್ಟ್ಸ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ಜಾಗತಿಕವಾಗಿ ಗರ್ಭಿಣಿ ಮಹಿಳೆಯರಲ್ಲಿ ಅನಾರೋಗ್ಯ ಮತ್ತು ಸಾವಿಗೆ ಪ್ರಮುಖ ಕಾರಣವಾಗಿರುವ ಸಂತಾನೋತ್ಪತ್ತಿ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ಜನಸಂಖ್ಯಾ ದಿನದ ಗುರಿಯಾಗಿದೆ. ಕುಟುಂಬ ಯೋಜನೆ, ಲಿಂಗ ಸಮಾನತೆ, ತಾಯಿ ಮತ್ತು ಮಕ್ಕಳ ಆರೋಗ್ಯ, ಬಡತನ, ಮಾನವ ಹಕ್ಕುಗಳು, ಲೈಂಗಿಕ ಶಿಕ್ಷಣ, ಗರ್ಭನಿರೋಧಕ ಬಳಕೆ ಮತ್ತು ಹದಿಹರೆಯದ ಗರ್ಭಧಾರಣೆಯಂತಹ ವಿಷಯಗಳ ಕುರಿತು ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಈ ದಿನವು ಜನರನ್ನು ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು.
ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣಕ್ಕೆ ಅಗತ್ಯವಾದ ಮಾನವ ಹಕ್ಕಾಗಿ ಸುರಕ್ಷಿತ, ಸ್ವಯಂಪ್ರೇರಿತ ಕುಟುಂಬ ಯೋಜನೆಯ ಮಹತ್ವವನ್ನು ಇದು ಎತ್ತಿ ತೋರಿಸುತ್ತದೆ. ಸುಲಭವಾಗಿ ಲಭ್ಯವಾಗುವ ಕುಟುಂಬ ಯೋಜನೆ ಬಡತನವನ್ನು ಕಡಿಮೆ ಮಾಡಲು, ಆರೋಗ್ಯವನ್ನು ಸುಧಾರಿಸಲು ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಇದು ಸುಸ್ಥಿರ ಅಭಿವೃದ್ಧಿಗೆ ನಿರ್ಣಾಯಕವಾಗಿದೆ . ಈ ಆಚರಣೆಯು ಯುವಕರಲ್ಲಿ, ವಿಶೇಷವಾಗಿ 15-19 ವರ್ಷ ವಯಸ್ಸಿನವರಲ್ಲಿ ಲೈಂಗಿಕತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸುತ್ತದೆ ಎಂದರು.
ವೇದಿಕೆಯ ಮೇಲೆ ಉಪಸ್ಥಿತರಿದ್ದ ಜನಕಲ್ಯಾಣ ಎಡ್ಜುಕೇಷನ್ ಆಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಅಧ್ಯಕ್ಷರಾದ ಸುರೇಶ್ ಕಾನೇಕರ್ ಮಾತನಾಡಿ, ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಜನಸಂಖ್ಯೆಯಿಂದ ಹೆಚ್ಚುತ್ತಿರುವ ಸವಾಲುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಉಷಾದೇವಿ ಪಾಟೀಲ್ ವಹಿಸಿದ್ದರು. ಯೂತ್ ಅಡ್ವೆಂಚರ್ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ದೇವರಾಜ್ ಕನ್ನಡಗಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪತ್ರಿಕಾ ಮಾಧ್ಯಮದ ಸಂಚಾಲಕ ಐ.ಕೆ ಪಾಟೀಲ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಉಪನ್ಯಾಸಕಿ ಝೈಭಾ ಅಖ್ತರ್ ಕಾರ್ಯಕ್ರಮ ನಿರೂಪಿಸಿದರು, ಜಾನಕಿ ಅವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕು. ಸಿದ್ದಮ್ಮ ಹಾಗೂ ಭಾಗ್ಯಜ್ಯೋತಿ ಪ್ರಾರ್ಥಿಸಿದರು, ಜವೇರಿಯಾ ವಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.


