ಕಲಬುರಗಿ: ಜಿಲ್ಲೆಯಲ್ಲಿ ಕಳೆದ 2024-25ನೇ ಸಾಲಿನ ಬೆಳೆವಿಮೆ ಪರಿಹಾರದಡಿ ಬಾಕಿ ಇದ್ದ 291.92 ಕೋಟಿ ರೂ. ಬೆಳೆ ವಿಮೆ ಪರಿಹಾರ ಒಂದು ವಾರದಲ್ಲಿ ಬಿಡುಗಡೆಯಾಗಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮೊದಲನೇ ಕಂತಾಗಿ 364 ಕೋಟಿ ರೂ. ಬೆಳೆ ವಿಮೆ ಪರಿಹಾರ ಮೊತ್ತ ರೈತರಿಗೆ ಬಿಡುಗಡೆಯಾಗಿದ್ದು, ಬಾಕಿ ಮೊತ್ತ ಬಿಡುಗಡೆಗೆ ಹಣಕಾಸು ಇಲಾಖೆ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಕಲಬುರಗಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಸೂಕ್ತ ವಿವರಣೆ ನೀಡಿದ್ದರಿಂದ ಬಾಕಿ 291.92 ಕೋಟಿ ರೂ. ಮೊತ್ತ ಬಿಡುಗಡೆಗೂ ಸಹ ಹಣಕಾಸು ಇಲಾಖೆ ಸಮ್ಮತ್ತಿಸಿದ್ದು, ಶೀಘ್ರದಲ್ಲಿ ರೈತರ ಬ್ಯಾಂಕ್ ಖಾತೆ ಪರಿಹಾರ ಹಣ ಜಮೆಯಾಗಲಿದೆ ಎಂದರು.
ಒಂದೇ ಅರ್ಥಿಕ ಸಾಲಿನಲ್ಲಿ 650 ಕೋಟಿ ರೂ. ಬೆಳೆ ವಿಮೆ ಪರಿಹಾರ ಕಲಬುರಗಿಗೆ ಬಂದಿರುವುದು ಜಿಲ್ಲೆಯ ಇತಿಹಾಸದಲ್ಲಿಯೆ ಮೊದಲು ಎಂದ ಅವರು, ಪ್ರತಿ ವರ್ಷ ಅನಾವೃಷ್ಟಿಯಾದಾಗ ರೈತರು ಪರಿಹಾರ ಕೋರುವುದು ಸಾಮಾನ್ಯ. ಇಲ್ಲಿನ ತೊಗರಿಗೆ ಪರಿಹಾರ ಕೇಳಿದರೆ ದಕ್ಷಿಣದವರು ಅಡಕೆ, ತೆಂಗು ಬೆಳೆಗಳಿಗೆ ಪರಿಹಾರ ಕೋರುತ್ತಾರೆ. ಹೀಗೆ ಪ್ರತಿ ವರ್ಷ ಸರ್ಕಾರ ಪರಿಹಾರ ಕೊಡುವುದು ಕಷ್ಟದಾಯಕ. ಹೀಗಾಗಿ ಬೆಳೆ ವಿಮೆ ನೋಂದಣಿಗೆ ಕಲಬುರಗಿ ಜಿಲ್ಲಾಡಳಿತ ಹೆಚ್ಚು ಒತ್ತು ನೀಡಿದ ಪರಿಣಾಮ ಇಷ್ಟೊಂದು ಬೃಹತ್ ಮೊತ್ತದ ವಿಮೆ ಒರಿಹಾರ ಪಡೆಯಲು ಸಾಧ್ಯವಾಗಿದ್ದು, ಮುಂದೇಯೂ ಸಹ ರೈತರು ಕಡ್ಡಾಯವಾಗಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.
1.05 ಲಕ್ಷ ಹೆಕ್ಟೇರ್ ಬೆಳೆ ಹಾನಿ:
ಜಿಲ್ಲೆಯಾದ್ಯಂತ ಕಳೆದ ಆಗಸ್ಟ್ ಮಾಹೆಯಲ್ಲಿ ಸುರಿದ ಮಳೆಯಿಂದಾಗಿ 1.05 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ, ಉದ್ದು, ಹತ್ತಿ ಸೇರಿದಂತೆ ತೋಟಗಾರಿಕೆ ಬೆಳೆ ಹಾನಿಯಾಗಿರುವುದು ಪ್ರಾಥಮಿಕ ಸಮೀಕ್ಷೆಯಲ್ಲಿ ಗೊತ್ತಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಿಖರವಾದ ವರದಿಗೆ ಹೋಬಳಿವಾರು ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಲು ಈಗಾಗಲೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದು, ಅದರಂತೆ ಇನ್ನೂ ಹತ್ತು ದಿನದಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಸರಿಯಾದ ಮಾಹಿತಿ ಪಡೆದು ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಕಂದಾಯ ಇಲಾಖೆಯಿಂದ ಪರಿಹಾರ ಪೋರ್ಟಲ್ನಲ್ಲಿ ದಾಖಲು ಮಾಡಲಾಗುವುದು. ಹಾಗಾಗಿ ರೈತರು ಬೆಳೆ ಹಾನಿ ಕುರಿತು ಸಮೀಕ್ಷೆಗೆ ಬರುವ ಅಧಿಕಾರಿ-ಸಿಬ್ಬಂದಿಗಳಿಗೆ ಸರಿಯಾದ ಮಾಹಿತಿ ನೀಡುವಂತೆ ತಿಳಿಸಿದ್ದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ಬೇಡಿಕೆ ಪರಿಶೀಲನೆ ಹಂತದಲ್ಲಿದೆ ಎಂದು ಪತ್ರಕರ್ತರ ಪ್ರಶ್ನೆಯೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು, ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯ ಸರ್ಕಾರದಿಂದ ಪ್ರತಿ ವರ್ಷ 5,000 ಕೋಟಿ ರೂ. ಅನುದಾನ ನೀಡುತ್ತಿದ್ದು, ಇದೇ ಪ್ರಮಾಣದ ಅನುದಾನ ಕೇಂದ್ರ ಸರ್ಕಾರದಿಂದಲೂ ಬಿಡುಗಡೆ ಮಾಡಬೇಕೆಂದು ಈಗಾಗಲೆ ಮುಖ್ಯಮಂತ್ರಿಗಳು ಪ್ರದಾನಮಂತ್ರಿ ಮತ್ತು ಹಣಕಾಸು ಸಚಿವರಿಗೆ ಪತ್ರ ಬರೆಸಿದ್ದಾರೆ. ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಸಗ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದು, ಕೇಂದ್ರದಿಂದ ಇನ್ನು ಯಾವುದೇ ಉತ್ತರ ಬಂದಿಲ್ಲ ಎಂದರು.
ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿಎಂ ಆಗಮನ:
ಕೆ.ಕೆ.ಆರ್.ಡಿ.ಬಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.16ರ ಸಂಜೆ ಕಲಬುರಗಿ ನಗರಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 17 ರಂದು ಬೆಳಿಗ್ಗೆ ಇಲ್ಲಿನ ತಿಮ್ಮಾಪುರಿ ವೃತ್ತದ ಸರ್ದಾರ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ 9 ಗಂಟೆಗೆ ಸಿ.ಎಂ ಸಿದ್ದರಾಮಯ್ಯ ಅವರು ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು ಎಂದರು.
ಕೆ.ಕೆ.ಆರ್.ಡಿ.ಬಿ. ಮಂಡಳಿಗೆ ಕಳೆದ ಮೂರು ಅರ್ಥಿಕ ಸಾಲಿನಲ್ಲಿ 13,000 ಕೋಟಿ ರೂಮ ಅನುದಾನ ಘೋಷಿಸಿದೆ. ಮಂಡಳಿ ಅನುದಾನ ಖರ್ಚು ಮಾಡುತ್ತಿಲ್ಲ ಎಂಬ ಅಪವಾದವಿತ್ತು. ತಾವು ಅಧಿಕಾರ ವಹಿಸಿದ ನಂತರ ಕಳೆದ 27 ತಿಂಗಳ ಅವಧಿಯಲ್ಲಿ ಬಿಡುಗಡೆಯಾದ 8,000 ಕೋಟಿ ರೂ. ಗಳ ಪೈಕಿ 6,224 ಕೋಟಿ ರೂ. ಅನುದಾನ ಖರ್ಚು ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಅಲಂ ಖಾನ್, ಕೆ.ಕೆ.ಆರ್. ಡಿ.ಬಿ. ಕಾರ್ಯದರ್ಶಿ ನಲಿನ್ ಅತುಲ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ.ಶರಣಪ್ಪ ಢಗೆ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.


