ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿ ಇಕ್ರಮ ಶರೀಫ್ (ಮೊಹಮ್ಮದ್ ಇಕ್ರಮುಲ್ಲಾ ಶರೀಫ್) ಅವರು ಸೋಮವಾರ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಂದ ಅಧಿಕಾರ ವಹಿಸಿಕೊಂಡರು.
ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ಶುಭ ಕೋರಿದರು.
ಸರ್ಕಾರ ಇತ್ತೀಚೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಆಯುಕ್ತರಾಗಿ ವರ್ಗಾಯಿಸಿ ಅವರ ಸ್ಥಾನಕ್ಕೆ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿ (ಆಯವ್ಯಯ ಮತ್ತು ಸಂಪನ್ಮೂಲ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಕ್ರಮ್ ಶರೀಫ್ ಅವರನ್ನು ನಿಯೋಜಿಸಿತ್ತು.
ಕರ್ನಾಟಕ ಮೂಲದವರಾದ ಇಕ್ರಮ್ ಶರೀಫ್ ಅವರು ಅಮೆರಿಕಾದ ವರ್ಜೀನಿಯಾ ವಿಶ್ವವಿದ್ಯಾಲಯದಿಂದ ಬಿ.ಎ.(ಅರ್ಥಶಾಸ್ತ್ರ) ಪದವಿ ಪಡೆದಿದ್ದಾರೆ. ಈ ಹಿಂದೆ ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳು ಶ್ಲಾಘನೆಗೆ ಪಾತ್ರವಾಗಿತ್ತು. ಇವರು ಕಳೆದ 2024ರ ಜುಲೈ ನಿಂದ ಇಲ್ಲಿಯವರೆಗೆ ಹಣಕಾಸು ಇಲಾಖೆಯಲ್ಲಿ ಆಯವ್ಯಯ ಸಿದ್ದಪಡಿಸುವ ಮಹತ್ವದ ಜವಾಬ್ದಾರಿಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತರಾದ ಸಾಹಿತ್ಯ ಆಲದಕಟ್ಟಿ, ಪ್ರಭುರೆಡ್ಡಿ ಸೇರಿದಂತೆ ತಾಲೂಕಿನ ತಹಶೀಲ್ದಾರರು, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದು ನೂತನ ಜಿಲ್ಲಾಧಿಕಾರಿಗಳಿಗೆ ಶುಭಕೋರಿದರು.


