ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಪ್ರಾಂಶುಪಾಲರಾದ ನಜೀಮಾ ಬೇಗಂ ಮತ್ತು ಪ್ರಭಾರಿ ವಾರ್ಡನ್ ಭೀಮಬಾಯಿ ಅವರನ್ನು ಅಮಾನತ್ತುಗೊಳಿಸಲಾಗಿದೆ.
ಗುರುವಾರ ರಾತ್ರಿ ಶಾಲೆಯ 50 ಮಕ್ಕಳು ರಾತ್ರಿ ಊಟ ಸೇವಿಸಿದ ನಂತರ ಅದರಲ್ಲಿ ಸುಮಾರು 39 ಮಕ್ಕಳು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಚಿತ್ತಾಪುರ ತಾಲೂಕಾ ಆಸ್ಪತ್ರೆ, ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರ್ತವ್ಯ ಲೋಪದ ಆಧಾರದ ಮೇಲೆ ನಜೀಮಾ ಬೇಗಂ ಮತ್ತು ಭೀಮಬಾಯಿ ಅವರನ್ನು ಅಮಾನತ್ತುಗೊಳಿಸಿದೆ. ಅಲ್ಲದೆ ಹೊರಗುತ್ತುಗೆ ಸಿಬ್ಬಂದಿಯನ್ನು ಸಹ ಬದಲಾಯಿಸಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಸಂಗಮೇಶ ತಿಳಿಸಿದ್ದಾರೆ.
ಇನ್ನು ಗುರುವಾರ ರಾತ್ರಿ ಆಸ್ಪತ್ರೆಗೆ ಎಲ್ಲಾ 50 ವಿದ್ಯಾರ್ಥಿಗಳನ್ನು ಆರೋಗ್ಯ ತಪಾಸಣೆ ಮಾಡಿಸಿದ ನಂತರ ವೈದ್ಯರ ನಿರ್ದೇಶನದಂತೆ ದಾಖಲಾದ 39 ಮಕ್ಕಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ಅದರಂತೆ ಗುಣಮುಖರಾದ ಎಲ್ಲಾ 39 ವಿದ್ಯಾರ್ಥಿಗಳನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಮಕ್ಕಳು ಆರೋಗ್ಯವಂತರಾಗಿದ್ದು, ಪಾಲಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಇನ್ನು ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲಾಧಿಕಾರಿಗಳಿಂದ ಮಕ್ಕಳ ಆರೋಗ್ಯ ವಿಚಾರಣೆ:
ಗುರುವಾರ ರಾತ್ರಿ ಶಾಲೆಯ ಮಕ್ಕಳು ರಾತ್ರಿ ಊಟ ಸೇವಿಸಿದ ನಂತರ ಅಸ್ವಸ್ಥಗೊಂಡ ಚಿತ್ತಾಪುರ ಆಸ್ಪತ್ರೆ, ಜಿನ್ಸ್ ಅಸ್ಪತ್ರೆಗೆ ದಾಖಲಾಗಿರುವ ಮಾಹಿತಿ ತಿಳಿದು ಕೂಡಲೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಗುರುವಾರ ರಾತ್ರಿಯೆ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯ ವಾರ್ಡ್ ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಎಲ್ಲ ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ಹಾಗೂ ಔಷಧೋಪಚಾರವನ್ನು ಯಾವುದೇ ಕೊರತೆಯಾಗದಂತೆ ಸಮರ್ಪಕವಾಗಿ ಒದಗಿಸುವಂತೆ ಸೂಚಿಸಿದರು.
ಅಲ್ಲದೆ, ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿ, ವೈದ್ಯಕೀಯ ಸೇವೆಯಲ್ಲಿ ಯಾವುದೇ ನಿರ್ಲಕ್ಷ್ಯವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಐ.ಜಿ.ಪಿ. ಶಾಂತನು ಸಿನ್ಹಾ, ಎಸ್.ಪಿ. ಅಡ್ಡೂರು ಶ್ರಿನಿವಾಸುಲು, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ್ ಸಂಕನೂರ್, ಡಿ.ಎಚ್.ಓ ಡಾ. ಶರಣಬಸಪ್ಪ ಕ್ಯಾತನಾಳ, ಚಿತ್ತಾಪುರ ತಹಶೀಲ್ದಾರ ನಾಗಯ್ಯ ಹಿರೇಮಠ ಸೇರಿದಂತೆ ಜಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ಅಧಿಕಾರಿಗಳು ಉಪಸ್ಥಿತರಿದ್ದರು.


