ಕಲಬುರಗಿ: ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರು ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ.
ಐಶರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಡಿಕ್ಕಿಯ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗವಿ ಗ್ರಾಮದ ನಿವಾಸಿ ಲಕ್ಷ್ಮಿಕಾಂತ್ ಎಂದು ಗುರುತಿಸಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರದಲ್ಲೂ ಅಡಚಣೆ ಉಂಟಾಯಿತು. ಸ್ಥಳೀಯರು ರಸ್ತೆ ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಆಗ್ರಹಿಸಿದರು.


