ಕಲಬುರಗಿ: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾದ ಡಿ.ಕೆ. ಶಿವಕುಮಾರ ಅವರು ಕಲಬುರಗಿ ಆಗಮಿಸುತ್ತಿದ್ದು, ಅವರ ಚೊಚ್ಚಲ ಪ್ರಾದೇಶಿಕ ಮಟ್ಟದ ಸಭೆ ಇದಾಗಿರುವುದರಿಂದ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಸಭೆ ಯಶಸ್ಸಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ರಾಜ್ಯದ ಗೃಹ, ಐ.ಟಿ-ಬಿ.ಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಮುಖ್ಯಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಖ್ಯಮಂತ್ರಿಗಳ ಜೊತೆಗೆ ಉಪ ಮುಖ್ಯಮಂತ್ರಿ ಹಾಗೂ ಈ ಭಾಗದ ಸಚಿವರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಇತರೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸುವುದರಿಂದ ಗಣ್ಯರ ಭದ್ರತೆ, ವಸತಿ, ಊಟೋಪಚಾರ, ಶಿಷ್ಟಚಾರದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಸೂಪರ್ ಎಲ್ನಿನೋ ಪರಿಣಾಮ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಪರಿಸ್ಥಿತಿ ಖುದ್ದು ಅರಿಯಲು ಸಿ.ಎಂ. ಅವರು ಪ್ರಾದೇಶಿಕ ಮಟ್ಡದ ಸಭೆ ಕರೆದಿದ್ದಾರೆ.ಇದಾದ ನಂತರ ಇತರೆ ವಿಭಗಾದ ಸಭೆ ನಡೆಸಲಾಗುತ್ತಿದೆ. ಹೀಗಾಗಿ ಈ ಸಭೆ ಇತರೆ ಸಭೆಗಳಿಗೆ ಮಾದರಿಯಾಗುವಂತೆ ಸರ್ವ ಸಿದ್ಧತೆ ಕೈಗೊಳ್ಳಬೇಕು. ತೀವ್ರ ಸವಾಲಿನ ಬರ ಪರಿಸ್ಥಿರಿ ಸಮರ್ಥ ನಿರ್ವಹಣೆ ಮತ್ತು ತೆಗೆದುಕೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳೆ ಸಭೆಯ ಪ್ರಮುಖ ವಿಷಯವಾಗಿದೆ. ಹೀಗಾಗಿ ಸಭೆಯಲ್ಲಿ ಭಾಗವಹಿಸುವ ವಿಭಾಗ ಮಟ್ಡದ ಅಧಿಕಾರಿಗಳು ಏಳು ಜಿಲ್ಲೆಗಳ ಸಂಪೂರ್ಣ ಮಾಹಿತಿಯೊಂದಿಗೆ ಆಗಮಿಸಬೇಕು. ಸಿ.ಎಂ. ಡಿ.ಸಿ.ಎಂ ಸೇರಿದಂತೆ ಸಚಿವರು, ಶಾಸಕರು ಏಜೆಂಡಾ ಹೊರತಾಗಿಯೂ ಯಾವುದೇ ವಿಷಯ ಸಭೆಯಲ್ಲಿ ಪ್ರಸ್ತಾಪಿಸಿದಲ್ಲಿ ಕ್ಷಣಾರ್ಧದಲ್ಲಿ ಮಾಹಿತಿ ನೀಡಲು ಪೂರ್ವಸಿದ್ಧತೆಯೊಂದಿಗೆ ಬರಬೇಕೆಂದು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಿ.ಎಂ. ಪ್ರವಾಸ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಮಿತಿ ರಚಿಸಲಾಗುತ್ತಿದ್ದು, ಅಧಿಕಾರಿಗಳಿಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಎಲ್ಲಾ ಪೂರ್ವಸಿದ್ಧತಾ ಕಸರ್ಯ ಸೋಮವಸರ ಸಂಜೆಯೊಳಗೆ ಪೂರ್ಣಗೊಳಿಸಬೇಕು ಎಂದರು.
ಸಭೆಯಲ್ಲಿ ಈಶಾನ್ಯ ವಲಯದ ಡಿ.ಐ.ಜಿ.ಪಿ ಶಾಂತನು ಸಿನ್ಹಾ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.


