ಕಲಬುರಗಿ: ಕಲಬುರಗಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೇಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟು ಘಟಕ, , ಸ್ವಾಮಿ ವಿವೇಕಾನಂದ ಯುತ್ ಮೂಮೆಂಟ್ ಸಂಸ್ಥೆ ಹಾಗೂ ಕಲಬುರಗಿ ಕೇಂದ್ರ ಕಾರಾಗೃಹ ಇವುಗಳ ಸಹಯೋಗದೊಂದಿಗೆ ಕಾರಾಗೃಹದ ಬಂದಿಗಳಿಗೆ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಗುರುವಾರ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ, ಕಲಬುರಗಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ||ಚಂದ್ರಶೇಖರ್ ನರಬೋಳ ಅವರು, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಬಂದಿಗಳ ಸಂಖ್ಯೆ ಹೆಚ್ಚಿನ ಪ್ರಮಾಣ ಇರುವುದರಿಂದ ಅವರಿಗೆ ಕ್ಷಯರೋಗ ಲಕ್ಷಣ ಕುರಿತು ತಿಳಿ ಹೇಳಿ ಸೂಕ್ತ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಏಕೆಂದರೆ ಮುಂಚಿತವಾಗಿ ತಪಾಸಣೆ ಮಾಡಿಸಿಕೊಳ್ಳುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಎಲ್ಲಾ ಕಾರಾಗೃಹದ ಬಂದಿಗಳು ಈ ಆರೋಗ್ಯ ತಪಾಸಣೆ ಕಾರ್ಯಕ್ರಮದ ಲಾಭ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಈ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿತಾ ಆರ್. ಅವರು, ಪ್ರತಿಯೊಬ್ಬರು ಶಾರೀರಕ, ಮಾನಸಿಕ ಹಾಗೂ ದೈಹಿಕವಾಗಿ ಸದೃಡರಾಗಿ ಇರಬೇಕಾದರೆ ಉತ್ತಮ ಆರೋಗ್ಯವನ್ನು ಹೊಂದಬೇಕು. ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ವಿವಿಧ ಕಾಯಿಲೆಗಳು ಬರದ ರೀತಿಯಲ್ಲಿ ಮುಂಜಾಗ್ರತೆ ವಹಿಸಬೇಕು. ಈ ಸಂಸ್ಥೆಯಿoದ ಪ್ರತಿ ಮಾಹೆ ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಶಿಬಿರಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಈ ಶಿಬಿರದಲ್ಲಿ ಮೊದಲನೇ ದಿನ 80 ಕೈದಿಗಳಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ|| ರವಿಂದ್ರ ಬನ್ನೇರಿ, ಜಿಲ್ಲಾ ಮೇಲ್ವಿಚಾರಕ ಮಲ್ಲಿಕಾರ್ಜುನ ಬಿರಾದಾರ, ಎಂ.ಇ.ಓ. ರಂಗನಾಥ್, ಜಿಲ್ಲಾ ಸಂಯೋಜಕ ಸಂತೋಷ, ಪ್ರಯೋಗಾಲಯ ತಜ್ಞ ಅಲ್ಲಾವುದ್ದೀನ್, ಸಹಾಯಕ ಆಡಳಿತಾಧಿಕಾರಿ ಭೀಮಾಶಂಕರ್ ಡಾಂಗೆ ಹಾಗೂ ಕಾರಾಗೃಹದ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.
ಆಪ್ತ ಸಮಾಲೋಚಕರಾದ ಸುಗುಲಾ ರಾಣಿ ಅವರು ಪ್ರಾರಂಭದಲ್ಲಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಸಂಸ್ಥೆಯ ಶಿಕ್ಷಕ ನಾಗರಾಜ ಮುಲಗೆ ವಂದಿಸಿದರು.


