ಕಲಬುರಗಿ: ನೆರೆಯ ಮಹಾರಾಷ್ಟ್ರದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದರಿಂದ ಗಡಿ ಭಾಗದಲ್ಲಿರುವ ಜಿಲ್ಲೆಯ ಆಳಂದ, ಅವಜಲಪೂರ ಮತ್ತು ಕಲಬುರಗಿ ತಾಲ್ಲೂಕುಗಳ ಜಾನುವಾರುಗಳಲ್ಲಿಯೂ ಸಹ ಈ ರೋಗದ ಲಕ್ಷಣಗಳು ಹೆಚ್ಚು ಕಂಡುಬರುತ್ತಿದ್ದು, ರೈತರು ಆತಂಕಕ್ಕೆ ಒಳಗಾಗದೆ ದನಕರುಗಳಿಗೆ ಸಮೀಪದ ಪಶು ಕೇಂದ್ರಕ್ಕೆ ಕರೆದುಕೊಂಡು ಹೋಗಿ ಲಸಿಕೆ ಕೊಡಿಸಬೇಕೆಂದು ರೈತಾಪಿ ವರ್ಗದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.
1 ರಿಂದ 6 ತಿಂಗಳ ಅವಧಿಯ ದನಕರುಗಳಲ್ಲಿ ಈ ಚರ್ಮಗಂಟು ರೋಗವು ವಿಶೇಷವಾಗಿ ಕಂಡುಬರುತ್ತದೆ. ರೋಗ ಪೀಡಿತ ಜಾನುವಾರುಗಳ ಮೈತುಂಬಾ ಸಣ್ಣ ಗಾತ್ರದ ಗುಳ್ಳಿಗಳು ಕಾಣಿಸಿಕೊಂಡು ಜಾನುವಾರುಗಳು ರೋಗದಿಂದ ಬಳಲುತ್ತವೆ. ಚರ್ಮಗಂಟು ರೋಗ (Lumpy Skin Disease) ಒಂದು ವೈರಾಣು ರೋಗವಾಗಿದ್ದು ಒಂದು ಪ್ರಾಣಿದಿಂದ ಇನ್ನೊಂದು ಪ್ರಾಣಿಗೆ ವೇಗವಾಗಿ ಹರಡುತ್ತದೆ. ಹೀಗಾಗಿ ರೋಗಪೀಡಿತ ಜಾನುವಾರುಗಳನ್ನು ಪ್ರತ್ಯೇಕವಾಗಿ ಕಟ್ಟಬೇಕು ಮತ್ತು ತಕ್ಷಣವೇ ಪಶುವೈದ್ಯಕೀಯ ಸಂಸ್ಥೆಗೆ ಭೇಟಿ ನೀಡಿ ಚಿಕಿತ್ಸೆ ಕೊಡಿಸಬೇಕು ಎಂದಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೆ ಚರ್ಮಗಂಟು (LSD) ರೋಗದ ವಿರುದ್ಧ 1 ಲಕ್ಷ ಲಸಿಕೆ ಸಂಗ್ರಹವಿದ್ದು, ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಹಂತ ಹಂತವಾಗಿ ಅದತ್ಯ ಮೇರೆಗೆ ಪಶು ವೈದ್ಯಕೀಯ ತಂಡದೊಂದಿಗೆ ಲಸಿಕೆ ಕಾರ್ಯಕ್ರಮ ಅಯೋಜಿಸಲಾಗುತ್ತದೆ. ರೈತ ಬಾಂಧವರು 1 ತಿಂಗಳ ಮೇಲ್ಪಟ್ಟ ಎಲ್ಲಾ ದನಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು. ಇದಕ್ಕಾಗಿ ಪಶು ಸಂಗೋಪನೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಡಿ.ಸಿ. ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಕೀಯ ಸಂಸ್ಥೆಯನ್ನು ಮತ್ತು ತುರ್ತು ಸಂದರ್ಭದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಜಾನುವಾರುಗಳ ಸಂಚಾರಿ ಚಿಕಿತ್ಸಾ ಘಟಕದ ಉಚಿತ ಸಹಾಯವಾಣಿ ಸಂಖ್ಯೆ 1962 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


