ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20 ವರ್ಷಗಳಿಂದ ಅಡುಗೆ ಸಹಾಯಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ, ದಿನಗೂಲಿ ನೌಕರರ ಸಂಘದ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮುಂದೆ ಜಮಾಯಿಸಿದ ನೌಕರರು, ಸರ್ಕಾರದ ವಿಳಂಬ ನೀತಿಯ ವಿರುದ್ಧ ಘೋಷಣೆ ಕೂಗುತ್ತಾ ಧರಣಿ ಸತ್ಯಾಗ್ರಹ ನಡೆಸಿದರು. ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಕನಿಷ್ಠ ವೇತನ ಹಾಗೂ ಸಕಾಲಕ್ಕೆ ಸಂಬಳ ನೀಡದೆ ಇಲಾಖೆಯು ಕಾರ್ಮಿಕರ ಬದುಕಿನ ಜೊತೆ ಆಟವಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.
ಕಳೆದ 5 ತಿಂಗಳಿಂದ ವೇತನವಿಲ್ಲದೆ ಕುಟುಂಬ ನಿರ್ವಹಣೆ ಮಾಡುವುದು ದುಸ್ತರವಾಗಿದೆ. ಸಾಲದ ಸುಳಿಗೆ ಸಿಲುಕಿರುವ ನೌಕರರ ಹಿತದೃಷ್ಟಿಯಿಂದ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಇತರೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡರಾದ ದಶರಥ ಕಲಗುರ್ತಿ, ಅಣ್ಣರಾಯ ಜಾಡಿ, ಭೀಮಾಶಂಕರ್ ದಂಡೆ, ಮಹೇಶ್, ಮಲ್ಲಿಕಾರ್ಜುನ್, ಪುಂಡಲಿಕ, ಚಂದ್ರಶೇಖರ ಸೇರಿದಂತೆ ಹಲವು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.


