ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅತೀ ಹೆಚ್ಚಿನ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಸಹಾಯವಾಣಿ -1098, ಸಲಹಾ ಮಂಡಳಿ, ಮುಖ್ಯಮಂತ್ರಿ ಬಾಲಸೇವಾ ಯೋಜನೆ ಮತ್ತು ಪಿ.ಎಮ್.ಕೇರ, ಹೆಣ್ಣು ಮಕ್ಕಳ ಅನುಪಾಲನಾ ಗೃಹ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2023 ರಲ್ಲಿ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಬಾಲ್ಯವಿವಾಹ ಪ್ರಕರಣಗಳಲ್ಲಿ ನ್ಯಾಯಾಲಯವು ಕುಟುಂಬದ 4 ಜನ ಸದಸ್ಯರಿಗೆ ಶಿಕ್ಷೆಯನ್ನು ವಿಧಿಸಿರುತ್ತದೆ. ಇಂತಹ ಇತ್ಯರ್ಥಗೊಂಡ ನ್ಯಾಯಾಲಯಗಳ ಪ್ರಕರಣಗಳನ್ನು ಎಲ್ಲಾ ಜಿಲ್ಲೆಯ ಅಧಿಕಾರಿಗಳಿಗೆ ಜನರಿಗೆ ಅರಿವು ನೀಡಬೇಕೆಂದು ಸೂಚನೆ ನೀಡಿದರು.
ಬಾಲಗರ್ಭಿಣಿ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಡ್ಡಾಯವಾಗಿ ಪ್ರಥಮ ವರ್ತಮಾನ ವರದಿಯನ್ನು ಮಾಡಬೇಕು. ಕೇವಲ ಹೇಳಿಕೆಗಳನ್ನು ನೀಡದೆ ಸಂಬಂಧಪಟ್ಟ ಠಾಣೆಗೆ ತೆರಳಿ ವರದಿ ಮಾಡುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕೋವಿಡ್ನಲ್ಲಿ ಪಾಲಕರನ್ನು ಕಳೆದುಕೊಂಡಿರುವ ಪಿ.ಎಂ.ಕೇರ್ ಯೋಜನೆ ಅಡಿ ದಾಖಲಾಗಿರುವ ಮಕ್ಕಳಿಗೆ ಜಿಲ್ಲಾಧಿಕಾರಿಗಳು ಸ್ನೇಹ ಪತ್ರವನ್ನು ವಿತರಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾಮಕ್ಕಳ ರಕ್ಷಣಾಧಿಕಾರಿ ವಿ. ಮಂಜುಳಾ ಪಾಟೀಲ ಅವರು ಪಿ.ಪಿ.ಟಿ. ಮೂಲಕ ಪ್ರತಿಯೊಂದು ಇಲಾಖೆಯ ಮಾಹಿತಿ ನೀಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ, ಮಹಾನಗರ ಪಾಲಿಕೆ ಆಯುಕ್ತರಾದ ಅವಿನಾಶ ಶಿಂಧೆ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಸಮಾಜ ಕಲ್ಯಾಣಾಧಿಕಾರಿ ಪ್ರೀತಿ ದೊಡ್ಡಮನಿ, ಡಿ.ಹೆಚ್.ಓ. ಡಾ.ಶರಣಬಸಪ್ಪ ಕ್ಯಾತನಾಳ, ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕ ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆಪ್ತ ಸಮಾಲೋಚಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.


